YouVersion Logo
Search Icon

ಯೆಜೆಕಿಯೇಲನು 11

11
ಜೆರುಸಲೇಮಿನಲ್ಲೇ ಉಳಿದಿದ್ದ ದುರಾಲೋಚನೆಕಾರರ ಖಂಡನೆ
1ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.
2ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ; 3ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ. 4ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.
5ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ. 6ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.
7“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು. 8ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ. 9ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು. 10ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು. 11ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು. 12ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”
13ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.
ಗಡೀಪಾರಾಗಿದ್ದವರೊಡನೆ ಹೊಸ ಒಡಂಬಡಿಕೆಯ ವಾಗ್ದಾನ
14ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ ಇದು: 15“ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?
16“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.
17“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು. 18ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು. 19ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು; 20ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು. 21ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”
ದೇವರ ತೇಜಸ್ಸು ಜೆರುಸಲೇಮನ್ನು ಬಿಟ್ಟು ತೆರಳಿತು
22ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು. 23ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು. 24ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು. 25ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ.

Highlight

Copy

Compare

Share

None

Want to have your highlights saved across all your devices? Sign up or sign in