ಮತ್ತಾಯ 14
14
ಹೆರೋದನ ಮರುಳಿಗೆ ಯೊವಾನ್ನನ ಕೊರಳು
(ಮಾರ್ಕ. 6:14-29; ಲೂಕ. 9:7-9)
1ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು. 2ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು
3ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು. 4ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು. 5ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.
6ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು. 7ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು. 8ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.
9ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು. 10ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು; 11ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. 12ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.
ನಿರ್ಜನ ಪ್ರದೇಶದಲ್ಲಿ ಭರ್ಜರಿ ಭೋಜನ
(ಮಾರ್ಕ. 6:30-44; ಲೂಕ. 9:10-17; ಯೊವಾ. 6:1-14 )
13ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು. 14ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.
15ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು. 16ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು. 17ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು. 18ಯೇಸು, “ಅವನ್ನು ಇಲ್ಲಿಗೆ ತನ್ನಿ,” ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು. 19ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು. 20ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು. 21ಊಟ ಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.
ಕಡಲ ಮೇಲೆ ಕಾಲುನಡೆ
(ಮಾರ್ಕ. 6:45-52; ಯೊವಾ. 6:15-21)
22ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು. 23ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು. 24ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು. 25ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು. 26ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು. 27ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು. 28ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು 29ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು. 30ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು. 31ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು. 32ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು. 33ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.
ಅರಿವೆಯಿಂದಲೂ ಹರಿದುಬಂದ ಆರೋಗ್ಯ
(ಮಾರ್ಕ. 6:53-56)
34ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು. 35ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು. 36ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.
Currently Selected:
ಮತ್ತಾಯ 14: KANCLBSI
Highlight
Share
Compare
Copy
Want to have your highlights saved across all your devices? Sign up or sign in
Kannada C.L. Bible - ಸತ್ಯವೇದವು C.L.
Copyright © 2016 by The Bible Society of India
Used by permission. All rights reserved worldwide.