YouVersion Logo
Search Icon

ಮತ್ತಾಯ 18

18
ಮುಗ್ಧಮಗುವಾಗಬಲ್ಲವನು ಮಹಾತ್ಮನಾಗಬಲ್ಲನು
(ಮಾರ್ಕ. 9:33-37; ಲೂಕ. 9:46-48)
1ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು. 2ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು: 3“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ. 4ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು. 5ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.”
ಪಾಪ ಪ್ರಚೋದಕರಿಗೆ ಶಾಪ
(ಮಾರ್ಕ. 9:42-48; ಲೂಕ. 17:1-2)
6“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು. 7ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ! 8ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು. 9ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.
10“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ. 11ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.#18:11 ಕೆಲವು ಪ್ರತಿಗಳಲ್ಲಿ : ವಚನ 11: “ನರಪುತ್ರನು ಪತಿತರನ್ನು ಉದ್ಧಾರಮಾಡಲು ಬಂದನು."
ಕಾಣದೆಹೋದ ಕುರಿಮರಿ
(ಲೂಕ. 15:3-7)
12“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ? 13ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. 14ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.
ಸೋದರನ ಸುಧಾರಣೆ
15“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು. 16ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ. 17ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.
18“ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.
ಸಭಾಪ್ರಾರ್ಥನೆಯ ಪ್ರಭಾವ
19“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ. 20ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”
ಕ್ಷಮೆಗೆ ಎಲ್ಲೆ ಇಲ್ಲ
21ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು. 22“ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು.
23ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ. 24ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’#18:24 ಮೂಲ - ತಲೆಂತು’; ನಾಣ್ಯಗಳ ಪಟ್ಟಿ ನೋಡಿ.ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು. 25ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ. 26ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ. 27ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.
28“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’#18:28 ಮೂಲ - ‘ದಿನಾರಿ’ ನಾಣ್ಯಗಳ ಪಟ್ಟಿ ನೋಡಿ. ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ. 29ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ. 30ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ. 31ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು. 32ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ. 33ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ. 34ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.
35“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.

Highlight

Share

Compare

Copy

None

Want to have your highlights saved across all your devices? Sign up or sign in