ಅರಣ್ಯಕಾಂಡ 23
23
ಬಿಳಾಮನ ಮೊದಲನೆಯ ಸಂದೇಶ
1ಬಿಳಾಮನು ಬಾಲಾಕನಿಗೆ, “ಇಲ್ಲಿ ನೀನು ಏಳು ಯಜ್ಞವೇದಿಕೆಗಳನ್ನು ನನಗೆ ಕಟ್ಟಿಸಿ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ನನಗೆ ಸಿದ್ಧಪಡಿಸು” ಅಂದನು. 2ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನೂ ಬಿಳಾಮನೂ ಪ್ರತಿಯೊಂದು ಯಜ್ಞವೇದಿಕೆಯ ಮೇಲೆ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದಾಗ, 3ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮ ಮಾಡಿದ ಸ್ಥಳದಲ್ಲೇ ಇರು. ನಾನು ಸ್ವಲ್ಪದೂರ ಹೋಗಿ ಬರುತ್ತೇನೆ. ಒಂದುವೇಳೆ ಯೆಹೋವನು ನನ್ನನ್ನು ಸಂಧಿಸಲು ಬರಬಹುದು. ಆತನು ನನಗೆ ಪ್ರಕಟಿಸುವುದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ದಿಣ್ಣೆಗೆ ಹೋದನು.
4ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
5ಆಗ ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ತಿರುಗಿಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
6ಬಿಳಾಮನು ಬಾಲಾಕನ ಬಳಿಗೆ ತಿರುಗಿಬಂದಾಗ ಬಾಲಾಕನು ಯಜ್ಞವೇದಿಕೆಯ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನೊಡನೆ ನಿಂತಿದ್ದರು. 7ಆಗ ಬಿಳಾಮನು ಹೀಗೆ ಹೇಳಿದನು:
“ಮೋವಾಬ್ಯರ ಅರಸನಾದ ಬಾಲಾಕನು
ನನ್ನನ್ನು ಅರಾಮಿನ ಪೂರ್ವ ದಿಕ್ಕಿನ ಬೆಟ್ಟಗಳಿಂದ ನನ್ನನ್ನು ಕರೆಸಿದನು.
‘ನೀನು ಬಂದು ನನಗೋಸ್ಕರ ಯಾಕೋಬ್ಯರನ್ನು ಶಪಿಸು;
ಇಸ್ರೇಲರ ವಿರುದ್ಧ ಮಾತನಾಡು’ ಎಂದು ಬಾಲಾಕನು ಹೇಳಿದನು.
8ಆದರೆ ದೇವರು ಅವರನ್ನು ಆಶೀರ್ವದಿಸಿರುವಾಗ
ನಾನು ಅವರನ್ನು ಶಪಿಸಲು ಆಗುವುದಿಲ್ಲ.
ಯೆಹೋವನು ಅವರ ಮೇಲೆ ನಾಶನವನ್ನು ಬರಮಾಡಲಿಲ್ಲ.
ಆದ್ದರಿಂದ ನಾಶನವು ಅವರ ಮೇಲೆ ಇಳಿದುಬರುವಂತೆ ಮಾಡಲು ನನಗೆ ಸಾಧ್ಯವಿಲ್ಲ.
9ಬೆಟ್ಟದ ಶಿಖರದಿಂದ ಅವರನ್ನು ನಾನು ನೋಡಿದೆನು;
ಗುಡ್ಡದಿಂದ ಅವರನ್ನು ಕಂಡೆನು.
ಅವರು ತಮ್ಮನ್ನು ಇತರ ಜನಾಂಗಗಳಿಗಿಂತ
ಬೇರೆಯಾದವರು ಎಂದು ಪರಿಗಣಿಸಿಕೊಂಡಿದ್ದಾರೆ.
10ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು;
ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು.
ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ.
ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”
11ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು! ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿಬಿಟ್ಟೆ” ಎಂದು ಹೇಳಿದನು.
12ಅದಕ್ಕೆ ಬಿಳಾಮನು, “ಯೆಹೋವನು ನನಗೆ ತಿಳಿಸುವುದನ್ನು ನಾನು ಹೇಳಬಾರದೇ?” ಎಂದು ಕೇಳಿದನು.
13ಆಗ ಬಾಲಾಕನು, “ದಯಮಾಡಿ ನನ್ನೊಂದಿಗೆ ಇನ್ನೊಂದು ಸ್ಥಳಕ್ಕೆ ಬಾ; ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸದೆ ಕಡೇ ಭಾಗವು ಮಾತ್ರ ಕಾಣಿಸುವುದು. ಅಲ್ಲಿಂದ ನನಗೋಸ್ಕರ ಅವರನ್ನೇ ಶಪಿಸಬೇಕು” ಎಂದು ಹೇಳಿದನು. 14ಹೀಗೆ ಬಾಲಾಕನು ಬಿಳಾಮನನ್ನು “ಕಾವಲುಗಾರರ ಬೆಟ್ಟಗಳು” ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಇದು ಪಿಸ್ಗಾ ಪರ್ವತಶ್ರೇಣಿಯ ತುದಿಯಲ್ಲಿತ್ತು. ಅಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಪ್ರತಿಯೊಂದು ವೇದಿಕೆಯಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದನು.
15ಬಿಳಾಮನು ಬಾಲಾಕನಿಗೆ, “ನೀನು ನಿನ್ನ ಯಜ್ಞವೇದಿಕೆಯ ಬಳಿಯಲ್ಲಿರು. ನಾನು ಆ ಕಡೆ ಹೋಗಿ ಯೆಹೋವನನ್ನು ಸಂಧಿಸುವೆನು” ಎಂದು ಹೇಳಿದನು.
16ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಮತ್ತೆ ಹೋಗಿ ಹೀಗೆ ಹೇಳಬೇಕು” ಅಂದನು. 17ಬಿಳಾಮನು ಬಾಲಾಕನ ಬಳಿಗೆ ಬಂದಾಗ ಅವನು ಇನ್ನೂ ಯಜ್ಞಪೀಠದ ಬಳಿಯಲ್ಲಿ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದು ಕೇಳಿದನು.
ಬಿಳಾಮನ ಎರಡನೆಯ ಸಂದೇಶ
18ಆಗ ಬಿಳಾಮನು ಈ ಸಂಗತಿಗಳನ್ನು ಹೇಳಿದನು,
“ಬಾಲಾಕನೇ, ಎದ್ದುನಿಂತು ನಾನು ಹೇಳುವುದನ್ನು ಕೇಳು.
ಚಿಪ್ಪೋರನ ಮಗನಾದ ಬಾಲಾಕನೇ, ಕೇಳು:
19ದೇವರು ಮನುಷ್ಯನಲ್ಲ;
ಆತನು ಸುಳ್ಳಾಡುವುದಿಲ್ಲ.
ದೇವರು ಮಾನವನಲ್ಲ;
ಆತನ ಉದ್ದೇಶಗಳು ಬದಲಾಗುವುದಿಲ್ಲ.
ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ,
ಅದನ್ನು ಮಾಡಿಯೇ ಮಾಡುತ್ತಾನೆ.
ಯೆಹೋವನು ವಾಗ್ದಾನ ಮಾಡಿದರೆ,
ಅದನ್ನು ನೆರವೇರಿಸುತ್ತಾನೆ.
20ಆ ಜನರನ್ನು ಆಶೀರ್ವದಿಸಬೇಕೆಂದು ಯೆಹೋವನು ನನಗೆ ಆಜ್ಞಾಪಿಸಿದನು;
ಯೆಹೋವನು ಅವರನ್ನು ಆಶೀರ್ವದಿಸಿದ್ದಾನೆ. ಅದನ್ನು ಬದಲಾಯಿಸಲು ನನಗೆ ಸಾಧ್ಯವಿಲ್ಲ.
21ಯಾಕೋಬನ ಜನರಲ್ಲಿ ಯಾವ ದೋಷವೂ ಇಲ್ಲ.
ಇಸ್ರೇಲಿನ ಜನರಲ್ಲಿ ಯಾವ ಆಪತ್ತು ಕಾಣುತ್ತಿಲ್ಲ.
ಯೆಹೋವನೇ ಅವರ ದೇವರು.
ಆತನು ಅವರೊಂದಿಗಿದ್ದಾನೆ.
22ದೇವರು ಅವರನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
ಅವರು ಕಾಡು ಕೋಣದಂತೆ ಬಲಿಷ್ಠರಾಗಿದ್ದಾರೆ.
23ನಿಜವಾಗಿಯೂ ಯಾಕೋಬನ ಜನರ ಮಧ್ಯದಲ್ಲಿ ಶಕುನ ನೋಡುವವರು ಇಲ್ಲ.
ಇಸ್ರೇಲಿನಲ್ಲಿ ಕಣಿ ಹೇಳುವವರು ಇಲ್ಲ.
ಜನರು, ಯಾಕೋಬನ ಮತ್ತು ಇಸ್ರೇಲರ ಬಗ್ಗೆ ಹೀಗೆ ಹೇಳುವರು:
‘ದೇವರು ಮಾಡಿದ ಮಹಾಕಾರ್ಯಗಳನ್ನು ನೋಡಿರಿ!’
24ಆ ಜನರು ಪ್ರಾಯಸಿಂಹದಂತೆ ಬಲಿಷ್ಠರು.
ಅವರು ಸಿಂಹದಂತೆ ಹೋರಾಡುತ್ತಾರೆ.
ಆ ಸಿಂಹ ತನ್ನ ವೈರಿಯನ್ನು ತಿಂದುಬಿಡುವತನಕ ವಿಶ್ರಮಿಸುವುದಿಲ್ಲ.
ಆ ಸಿಂಹವು ತನಗೆ ಬಲಿಯಾದವರ ರಕ್ತವನ್ನು ಹೀರುವವರೆಗೆ ಎಂದಿಗೂ ವಿಶ್ರಮಿಸುವುದಿಲ್ಲ.”
25ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
26ಅದಕ್ಕೆ ಬಿಳಾಮನು, “ಯೆಹೋವನು ಹೇಳುವುದನ್ನೇ ನಾನು ಮಾಡುತ್ತೇನೆ ಎಂದು ನಾನು ನಿನಗೆ ಮೊದಲೇ ಹೇಳಲಿಲ್ಲವೆ?” ಅಂದನು.
27ಆಮೇಲೆ ಬಾಲಾಕನು ಬಿಳಾಮನಿಗೆ, “ಸರಿ, ಇನ್ನೊಂದು ಸ್ಥಳಕ್ಕೆ ಬಾ. ಒಂದುವೇಳೆ ನೀನು ಅವರನ್ನು ಶಪಿಸಬೇಕೆಂದು ದೇವರು ಅಪೇಕ್ಷೆಪಡಬಹುದು” ಎಂದು ಹೇಳಿದನು. 28ಬಾಲಾಕನು ಬಿಳಾಮನನ್ನು “ಪೆಗೋರ್” ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿಂದ ಕೆಳಗಿರುವ ಮರುಭೂಮಿಯು ಕಾಣಿಸುತ್ತದೆ.
29ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಕೆಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು” ಎಂದು ಹೇಳಿದನು. 30ಬಾಲಾಕನು ಅವನ ಅಪ್ಪಣೆಯ ಮೇರೆಗೆ ಮಾಡಿ ಪ್ರತಿಯೊಂದು ಪೀಠದಲ್ಲಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸರ್ವಾಂಗಹೋಮವಾಗಿ ಅರ್ಪಿಸಿದನು.
Currently Selected:
ಅರಣ್ಯಕಾಂಡ 23: KERV
Highlight
Copy
Compare
Share
Want to have your highlights saved across all your devices? Sign up or sign in
Kannada Holy Bible: Easy-to-Read Version
All rights reserved.
© 1997 Bible League International