ರೋಮ್ನಗರದವರಿಗೆ ಬರೆದ ಪತ್ರ 10
10
1ಸಹೋದರ ಸಹೋದರಿಯರೇ, ಇಸ್ರೇಲರೆಲ್ಲರೂ ರಕ್ಷಣೆ ಹೊಂದಬೇಕೆಂಬುದೇ ನನ್ನ ಮಹಾಭಿಲಾಷೆ. ನಾನು ದೇವರಲ್ಲಿ ಅದಕ್ಕಾಗಿ ಪ್ರಾರ್ಥಿಸುತ್ತಿದ್ದೇನೆ. 2ನಾನು ಯೆಹೂದ್ಯರ ಬಗ್ಗೆ ಹೀಗೆ ಹೇಳಬಲ್ಲೆನು: ಅವರು ದೇವರನ್ನು ಹಿಂಬಾಲಿಸಲು ನಿಜವಾಗಿಯೂ ಪ್ರಯತ್ನಿಸುತ್ತಾರೆ. ಆದರೆ ಅವರಿಗೆ ಸರಿಯಾದ ಮಾರ್ಗ ಗೊತ್ತಿಲ್ಲ. 3ನೀತಿವಂತರನ್ನಾಗಿ ಮಾಡುವ ದೇವರ ಮಾರ್ಗವನ್ನು ಅವರು ತಿಳಿದಿಲ್ಲದ ಕಾರಣ ತಮ್ಮ ಸ್ವಂತ ಮಾರ್ಗದ ಮೂಲಕವಾಗಿ ತಮ್ಮನ್ನು ನೀತಿವಂತರನ್ನಾಗಿ ಮಾಡಿಕೊಳ್ಳಲು ಪ್ರಯತ್ನಿಸಿದರು. 4ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
5ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು”#ಯಾಜಕ. 18:5. ಎಂದು ಮೋಶೆ ಹೇಳಿದ್ದಾನೆ. 6ಆದರೆ ನಂಬಿಕೆಯ ಮೂಲಕ ನೀತಿನಿರ್ಣಯ ಹೊಂದುವುದರ ಬಗ್ಗೆ, “(ಕ್ರಿಸ್ತನನ್ನು ಕೆಳಕ್ಕೆ ಕರೆದುಕೊಂಡು ಬರಲು) ‘ಯಾರು ಪರಲೋಕಕ್ಕೆ ಏರಿಹೋಗಬಲ್ಲರು?’” ಎಂದಾಗಲಿ (ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು.) 7“‘ಯಾರು ಪಾತಾಳಕ್ಕೆ ಇಳಿದುಹೋಗಬಲ್ಲರು’ ಎಂದಾಗಲಿ ಹೇಳಬೇಡಿ” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
8ಇದಲ್ಲದೆ, “ದೇವರ ವಾಕ್ಯವು ನಿಮ್ಮ ಸಮೀಪದಲ್ಲೇ ಇದೆ. ಅದು ನಿಮ್ಮ ಬಾಯಲ್ಲಿಯೂ ನಿಮ್ಮ ಹೃದಯದಲ್ಲಿಯೂ ಇದೆ” ಎಂದು ಪವಿತ್ರ ಗ್ರಂಥವು ಹೇಳುತ್ತದೆ. ನಾವು ಜನರಿಗೆ ನಂಬಿಕೆಯ ಕುರಿತಾಗಿ ಸಾರುವ ವಾಕ್ಯವೇ ಅದು. 9“ಯೇಸುವೇ ಪ್ರಭು”ವೆಂದು ನಿನ್ನ ಬಾಯಿಯ ಮೂಲಕ ಹೇಳುವುದಾದರೆ ಮತ್ತು ಯೇಸುವನ್ನು ಸತ್ತವರೊಳಗಿಂದ ಜೀವಂತನಾಗಿ ಎಬ್ಬಿಸಿದವನು ದೇವರೇ ಎಂದು ನಿನ್ನ ಹೃದಯದಲ್ಲಿ ನಂಬುವುದಾದರೆ, ನೀನು ರಕ್ಷಣೆ ಹೊಂದುವೆ. 10ಹೌದು, ನಾವು ನಮ್ಮ ಹೃದಯಗಳಲ್ಲಿ ನಂಬುವುದರ ಮೂಲಕ ನೀತಿವಂತರಾಗುತ್ತೇವೆ. “ನಂಬುತ್ತೇವೆ” ಎಂದು ಬಾಯಾರೆ ಹೇಳುವುದರ ಮೂಲಕ ರಕ್ಷಣೆ ಹೊಂದುತ್ತೇವೆ.
11ಪವಿತ್ರ ಗ್ರಂಥವು ಹೀಗೆ ಹೇಳುತ್ತದೆ: “ಆತನಲ್ಲಿ ನಂಬಿಕೆಯಿಡುವ ಯಾವ ವ್ಯಕ್ತಿಯೂ ನಾಚಿಕೆಗೆ ಗುರಿಯಾಗುವುದೇ ಇಲ್ಲ.”#ಯೆಶಾಯ 28:16. 12ಏಕೆಂದರೆ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಒಬ್ಬನೇ ಪ್ರಭು. ತನ್ನಲ್ಲಿ ನಂಬಿಕೆಯಿಡುವ ಜನರೆಲ್ಲರಿಗೆ ಪ್ರಭುವು ಅನೇಕ ಆಶೀರ್ವಾದಗಳನ್ನು ಕೊಡುತ್ತಾನೆ. 13ಹೌದು, ಪವಿತ್ರ ಗ್ರಂಥವು ಹೇಳುವಂತೆ, “ಪ್ರಭುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ರಕ್ಷಣೆ ಹೊಂದುವನು.”#ಯೋವೇಲ 2:32.
14ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ? 15ಬೋಧಕರನ್ನು ಕಳುಹಿಸದ ಹೊರತು ಜನರಿಗೆ ತಿಳಿಸುವುದಾದರೂ ಹೇಗೆ? ಆದ್ದರಿಂದಲೇ, “ಸುವಾರ್ತಿಕರ ಪಾದಗಳು ಸುಂದರವಾಗಿವೆ”#ಯೆಶಾಯ 52:7. ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
16ಆದರೆ ಯೆಹೂದ್ಯರೆಲ್ಲರೂ ಆ ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. “ಪ್ರಭುವೇ, ನಾವು ಅವರಿಗೆ ಹೇಳಿದ ಸಂಗತಿಗಳನ್ನು ಯಾರು ನಂಬಿದರು?”#ಯೆಶಾಯ 53:1. ಎಂದು ಯೆಶಾಯ ಹೇಳಿದ್ದಾನೆ. 17ಹೀಗಿರಲು, ಸುವಾರ್ತೆಯನ್ನು ಕೇಳುವುದರ ಮೂಲಕ ನಂಬಿಕೆ ಬರುತ್ತದೆ. ಕ್ರಿಸ್ತನ ಬಗ್ಗೆ ಹೇಳುವುದರ ಮೂಲಕ ಸುವಾರ್ತೆ ಪ್ರಕಟವಾಗುತ್ತದೆ.
18ಆದರೆ, “ಜನರು ಸುವಾರ್ತೆಯನ್ನು ಕೇಳಲಿಲ್ಲವೇ?” ಎಂದು ನಾನು ಪ್ರಶ್ನಿಸುತ್ತೇನೆ. ಹೌದು, ಅವರು ಕೇಳಿದರು ಪವಿತ್ರ ಗ್ರಂಥ ಹೇಳುವಂತೆ:
“ಅವರ ಸ್ವರಗಳು ಲೋಕದಲ್ಲೆಲ್ಲಾ ಪ್ರಸಾರಗೊಂಡವು.
ಅವರ ಮಾತುಗಳು ಪ್ರಪಂಚದ ಎಲ್ಲಾ ಕಡೆಗಳಿಗೂ ಹೋದವು.”#ಕೀರ್ತನೆ 19:4.
19“ಇಸ್ರೇಲಿನ ಜನರು ಅರ್ಥಮಾಡಿಕೊಳ್ಳಲಿಲ್ಲವೇ?” ಎಂದು ನಾನು ಮತ್ತೆ ಕೇಳುತ್ತೇನೆ. ಹೌದು, ಅವರು ಅರ್ಥಮಾಡಿಕೊಂಡರು. ಮೊದಲನೆಯದಾಗಿ, ದೇವರು ಮೋಶೆಯ ಮೂಲಕ ಹೀಗೆ ತಿಳಿಸಿದ್ದಾನೆ:
“ಜನಾಂಗವೆನಿಸಿಕೊಳ್ಳದವರ ಮೂಲಕ ಹೀಗೆ ನಾನು ನಿಮ್ಮಲ್ಲಿ ಅಸೂಯೆ ಹುಟ್ಟಿಸುವೆನು.
ಬುದ್ದಿಹೀನರೆನಿಸಿಕೊಂಡ ಜನಾಂಗದ ಮೂಲಕ ನಾನು ನಿಮ್ಮನ್ನು ಸಿಟ್ಟಿಗೆಬ್ಬಿಸುವೆನು.”#ಧರ್ಮೋಪ. 32:21.
20ಬಳಿಕ ಯೆಶಾಯನು ದೇವರ ಈ ನುಡಿಯನ್ನು ಧೈರ್ಯವಾಗಿ ಹೇಳಿದ್ದಾನೆ:
“ನನ್ನನ್ನು ಹುಡುಕದೆ ಇದ್ದ ಜನರು
ನನ್ನನ್ನು ಕಂಡುಕೊಂಡರು.
ನನಗಾಗಿ ಕೇಳಿಕೊಳ್ಳದ ಜನರಿಗೆ ನನ್ನನ್ನು ತೋರ್ಪಡಿಸಿಕೊಂಡೆನು.”#ಯೆಶಾಯ 65:1.
21ಆದರೆ ಇಸ್ರೇಲಿನ ಜನರ ಬಗ್ಗೆ ದೇವರು:
“ನಾನು ಆ ಜನರಿಗಾಗಿ ದಿನವೆಲ್ಲಾ ಕಾದುಕೊಂಡಿದ್ದೆನು,
ಆದರೆ ಅವರು ವಿಧೇಯರಾಗಲಿಲ್ಲ; ನನ್ನನ್ನು ಹಿಂಬಾಲಿಸಲಿಲ್ಲ” ಎನ್ನುತ್ತಾನೆ.#ಯೆಶಾಯ 65:2.
Currently Selected:
ರೋಮ್ನಗರದವರಿಗೆ ಬರೆದ ಪತ್ರ 10: KERV
Highlight
Share
Copy
Want to have your highlights saved across all your devices? Sign up or sign in
Kannada Holy Bible: Easy-to-Read Version
All rights reserved.
© 1997 Bible League International