1 ಪೂರ್ವಕಾಲ ವೃತ್ತಾಂತ 14
14
ದಾವೀದನ ಅರಮನೆ ಹಾಗೂ ಕುಟುಂಬ
1ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು. 2ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.
3ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು. 4ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್, 5ಇಬ್ಹಾರ್, ಎಲೀಷೂವ, ಎಲ್ಪೆಲೆಟ, 6ನೋಗಹ, ನೆಫೆಗ್, ಯಾಫೀಯ, 7ಎಲೀಷಾಮ, ಎಲ್ಯಾದ#14:7 ಎಲ್ಯಾದ ಅಥವಾ ಬೇಲ್ಯಾದ, ಎಲೀಫೆಲೆಟ್.
ದಾವೀದನು ಫಿಲಿಷ್ಟಿಯರನ್ನು ಜಯಿಸಿದ್ದು
8ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು. 9ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು. 10ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು.
ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.
11ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್#14:11 ಬಾಳ್ ಪೆರಾಜಿಮ್ ಅರ್ಥ ಮುರಿದು ಬಿಡುವ ದೇವರು ಎಂದು ಹೆಸರಿಟ್ಟನು. 12ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.
13ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು. 14ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು. 15ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು. 16ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.
17ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.
Currently Selected:
1 ಪೂರ್ವಕಾಲ ವೃತ್ತಾಂತ 14: KSB
Highlight
Copy
Compare
Share
Want to have your highlights saved across all your devices? Sign up or sign in
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.