4
ಸಹಾಯಮಾಡಲು ಎಸ್ತೇರಳನ್ನು ಮೊರ್ದೆಕೈ ಪ್ರೋತ್ಸಾಹಿಸಿದ್ದು
1ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು. 2ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ. 3ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.
4ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ. 5ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.
6ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು. 7ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು. 8ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.
9ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು. 10ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ, 11“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
12ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು. 13ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ. 14ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.
15ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ, 16“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.
17ಆಗ ಮೊರ್ದೆಕೈ ಹೊರಟುಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.