ಜ್ಞಾನೋಕ್ತಿಗಳು 13
13
1ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ;
ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.
2ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ,
ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.
3ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ;
ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.
4ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ;
ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.
5ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ,
ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ
ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.
6ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ;
ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.
7ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ;
ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.
8ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ;
ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.
9ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ;
ದುಷ್ಟರ ದೀಪವು ಆರಿಹೋಗುವುದು.
10ಎಲ್ಲಿ ಗರ್ವವೋ ಅಲ್ಲಿ ಕಲಹ;
ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.
11ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು;
ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.
12ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ;
ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.
13ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು;
ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.
14ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ
ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.
15ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ;
ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.
16ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ;
ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.
17ದುಷ್ಟ ದೂತನು ಕೇಡಿಗೆ ಬೀಳುತ್ತಾನೆ;
ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.
18ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು;
ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.
19ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ;
ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.
20ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು;
ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.
21ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ;
ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.
22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು;
ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.
23ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ;
ಅನ್ಯಾಯವು ಅದನ್ನು ಹಾರಿಸಿಬಿಡುವುದು.
24ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ;
ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.
25ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ;
ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.
Currently Selected:
ಜ್ಞಾನೋಕ್ತಿಗಳು 13: KSB
Highlight
Share
Copy
Want to have your highlights saved across all your devices? Sign up or sign in
ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™
ಕೃತಿಸ್ವಾಮ್ಯ © 1999, 2020, 2022 Biblica, Inc.
ಅನುಮತಿಯೊಂದಿಗೆ ಬಳಸಲಾಗಿದೆ
ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ.
Holy Bible, Kannada Contemporary Version™
Copyright © 1999, 2020, 2022 by Biblica, Inc.
Used with permission. All rights reserved worldwide.