YouVersion Logo
Search Icon

ಜ್ಞಾನೋಕ್ತಿಗಳು 19

19
1ಬುದ್ಧಿಹೀನನ ವಕ್ರ ತುಟಿಗಳಿಗಿಂತ,
ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.
2ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ;
ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.
3ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ,
ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
4ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ;
ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.
5ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು;
ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.
6ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ.
ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
7ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ;
ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ?
ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ
ಅವನಿಗೆ ಏನೂ ದೊರಕದು.
8ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ;
ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
9ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ;
ಸುಳ್ಳಾಡುವವನು ಹಾಳಾಗಿ ಹೋಗುವನು.
10ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ;
ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.
11ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ;
ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.
12ಅರಸನ ಕೋಪವು ಸಿಂಹದ ಘರ್ಜನೆಯಂತಿದೆ;
ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
13ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು;
ಜಗಳವಾಡುವ ಹೆಂಡತಿ
ಯಾವಾಗಲೂ ತೊಟ್ಟಿಕ್ಕುವ ಹನಿ.
14ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು;
ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
15ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ;
ಸೋಮಾರಿಯು ಹಸಿವೆಗೊಳ್ಳುವನು.
16ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ,
ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.
17ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ;
ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
18ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು;
ಅವನ ಮರಣಕ್ಕೆ ನೀನು ಕಾರಣನಾಗಬೇಡ.
19ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು;
ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.
20ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು;
ಕಡೆಯಲ್ಲಿ ನೀನು ಜ್ಞಾನಿಯಾಗುವೆ.
21ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ;
ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
22ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ.
ಬಡವನು ಸುಳ್ಳುಗಾರನಿಗಿಂತ ಲೇಸು.
23ಯೆಹೋವ ದೇವರ ಭಯವು ಜೀವದಾಯಕವು;
ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.
24ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ,
ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!
25ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು;
ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.
26ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ
ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
27ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ,
ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.
28ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ;
ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.
29ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ,
ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.

Highlight

Share

Compare

Copy

None

Want to have your highlights saved across all your devices? Sign up or sign in

Videos for ಜ್ಞಾನೋಕ್ತಿಗಳು 19